ಅತಿ ದೊಡ್ಡ ಚಿನ್ನ ದರೋಡೆ ಪ್ರಕರಣವನ್ನು ಭೇದಿಸಿದ ಪೋಲಿಸರು.! ಆರು ತಿಂಗಳ ಬಳಿಕ ಸಿಕ್ಕಿಬಿದ್ದ ದರೋಡೆಕೋರರು.
ASHWASURYA/SHIVAMOGGA
news.ashwasurya.in
ಅಶ್ವಸೂರ್ಯ/ದಾವಣಗೆರೆ :ಇತ್ತೀಚೆಗೆ ಮಂಗಳೂರಿನ ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣವೇ ರಾಜ್ಯದ ಅತೀದೊಡ್ಡ ದರೋಡೆ ಪ್ರಕರಣ ಎಂದುಕೊಳ್ಳುವ ಮುನ್ನ ದಾವಣಗೆರೆ ಜಿಲ್ಲೆಯ ನ್ಯಾಮತಿಯಲ್ಲಿ ಎಸ್ಬಿಐ ಬ್ಯಾಂಕ್ನ ದೊಡ್ಡ ದರೋಡೆ ಪ್ರಕರಣವೊಂದು ಬೆಳಕಿಗೆ ಬಂದಿವೆ.! ಕಾರ್ಯಚರಣೆಗೆ ಇಳಿದ ಪೊಲೀಸರ ತಂಡ ಆರೋಪಿಗಳನ್ನು ಹೆಡೆಮುರಿಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.ಪೊಲೀಸರಿಗೆ ಸವಾಲ್ ಆಗಿದ್ದ ಈ ಪ್ರಕರಣವನ್ನು ಭೇದಿಸಲು ಸರಿ ಸುಮಾರು 6 ತಿಂಗಳೆ ಕಳೆದಿದೆ ಕೊನೆಗೂ ಆರೋಪಿಗಳನ್ನು ಬಂಧಿಸುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ. ಪ್ರಮುಖ ಆರೋಪಿಗಳಾದ ತಮಿಳುನಾಡು ಮೂಲದ ಸಹೋದರರಾದ ಅಜಯ್ ಹಾಗೂ ವಿಜಯ್ ಸೇರಿದಂತೆ ಒಟ್ಟು ಆರು ಆರೋಪಿಗಳನ್ನು ಬಂಧಿಸಿ ಸುಮಾರು 13 ಕೋಟಿ ಮೌಲ್ಯದ 17 ಕೆಜಿ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
2024ರ ಅಕ್ಟೋಬರ್ 28ರಂದು ನ್ಯಾಮತಿ ಎಸ್ಬಿಐ ಬ್ಯಾಂಕ್ನಲ್ಲಿ 13 ಕೋಟಿ ರೂ. ಮೌಲ್ಯದ 17 ಕೆಜಿ 750 ಗ್ರಾಂ ಚಿನ್ನಾಭರಣ ಕದ್ದು ಪರಾರಿಯಾಗಿದ್ದರು. ಆರೋಪಿಗಳು ದರೋಡೆ ಮಾಡುವ ಮುನ್ನ ಸಾಕಷ್ಟು ತಯಾರಿಯೊಂದಿಗೆ ಪಕ್ಕಾ ಪ್ಲ್ಯಾನ್ ಮಾಡಿ ದರೋಡೆ ಮಾಡಿದ್ದರು,ಆರೋಪಿಗಳು ಎಲ್ಲೂ ಸಣ್ಣ ಸುಳಿವನ್ನು ಪೊಲೀಸರಿಗೆ ಬಿಟ್ಟಕೊಟ್ಟಿರಲ್ಲಿಲ್ಲ. ಆದರೆ ಕರ್ನಾಟಕ ಪೊಲೀಸರು ಮತ್ತೊಮ್ಮೆ ತಾವೇನು ಎನ್ನುವುದನ್ನು ಸಾಬೀತು ಪಡಿಸಿದ್ದಾರೆ.ತಮ್ಮ ಕಾರ್ಯಕ್ಷಮತೆಯನ್ನು ದೇಶಕ್ಕೆ ತೋರಿಸಿದ್ದಾರೆ.
ಈ ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ವಿಜಯ್ ಕುಮಾರ್ ನ್ಯಾಮತಿಯಲ್ಲಿ ಬೇಕರಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದ. ಬ್ಯಾಂಕ್ನಲ್ಲಿ ಲೋನ್ ಪಡೆಯಲು ಎರಡು ಬಾರಿ ಅರ್ಜಿ ಹಾಕಿದ್ದ, ಈ ಅರ್ಜಿ ತಿರಸ್ಕಾರವಾಗಿತ್ತು. ಇದರಿಂದ ಸಿಟ್ಟಿಗೆದ್ದಿದ್ದ. ಇದೇ ಕಾರಣಕ್ಕೆ ಬ್ಯಾಂಕ್ ದರೋಡೆಗೆ “ಮನಿ ಹೆಸ್ಟ್” ವೆಬ್ ಸೀರಿಸ್ ನೋಡಿ ದರೋಡೆಗೆ ಮಾಸ್ಟರ್ ಪ್ಲಾನ್ ರೂಪಿಸಿದ್ದ ಎಂದು ತಿಳಿದುಬಂದಿದೆ. ಇನ್ನೂ ಆರೋಪಿಗಳು ಮೊಬೈಲ್, ವಾಹನ ಬಳಸದೇ, ಯಾವ ಸಾಕ್ಷಿಯನ್ನೂ ಬಿಡದೆ ದರೋಡೆ ಮಾಡಿದ್ದರು. ದರೋಡೆ ಮಾಡಿದ 17 ಕೆಜಿ ಚಿನ್ನವನ್ನು ತಮಿಳುನಾಡಿನ ಮಧುರೈನಲ್ಲಿರುವ ತೋಟದ ಮನೆಯ ಪಾಳು ಬಿದ್ದ ಬಾವಿಯಲ್ಲಿ ಇಟ್ಟಿದ್ದರು.
ವಿಜಯ್ಕುಮಾರ್(30), ಸೋದರ ಅಜಯ್ಕುಮಾರ್(28), ಬೆಳಗುತ್ತಿಯ ಅಭಿಷೇಕ(23), ಸುರಹೊನ್ನೆ ಗ್ರಾಮದವರಾದ ಚಂದ್ರ(23), ಮಂಜುನಾಥ(32), ಪರಮಾನಂದ(30)ನನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.