ನವದೆಹಲಿ :”D” ಗ್ಯಾಂಗ್ ಗೆ ಡಿಚ್ಚಿ ಕೊಟ್ಟ ಸುಪ್ರೀಂ.!ಜಾಮೀನು ರದ್ದು ಮತ್ತೆ ಜೈಲೆ ಗತಿ.!


news.ashwasurya.in
ಅಶ್ವಸೂರ್ಯ/ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದುಮಾಡಿ ಸುಪ್ರೀಂ ಕೋರ್ಟ್ ಆದೇಶಿಸಿದೆ.!
ಹೈಕೋರ್ಟ್ ಆದೇಶದ ಲೋಪವನ್ನು ಎತ್ತಿ ತೋರಿಸಿದ ಸುಪ್ರೀಂ ಕೋರ್ಟ್, ಸಾಕ್ಷ್ಯಗಳನ್ನು ಕೂಲಂಕಷವಾಗಿ ಪರಿಶೀಲಿಸುವಂತೆ ಆದೇಶಿಸಿದೆ.
ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 7 ಆರೋಪಿಗಳಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಜೆ ಬಿ ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರ ಪೀಠವು ಕರ್ನಾಟಕ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿ, ಅದು ವಿವಿಧ ದೋಷಗಳಿಂದ ಕೂಡಿದೆ ಎಂದು ಹೇಳಿದೆ.

ನಾವು ಎಲ್ಲವನ್ನೂ ಪರಿಗಣಿಸಿದ್ದೇವೆ. ಜಾಮೀನು ಮಂಜೂರು ಮತ್ತು ರದ್ದತಿ ಎರಡೂ ವಿಷಯದಲ್ಲಿ ಹೈಕೋರ್ಟ್ ಆದೇಶವು ಗಂಭೀರ ದೌರ್ಬಲ್ಯಗಳಿಂದ ಕೂಡಿದೆ ಎಂಬುದು ಸ್ಪಷ್ಟವಾಗಿದೆ, ಯಾಂತ್ರಿಕವಾಗಿ ತೀರ್ಪು ನೀಡಲಾಗಿದೆ. ಮೇಲಾಗಿ, ಹೈಕೋರ್ಟ್ ವಿಚಾರಣೆಯ ಪೂರ್ವ ಹಂತದಲ್ಲಿ ತೀರ್ಪು ನೀಡಲಾಗಿದೆ ಎಂದು ಹೇಳಿದೆ.
ರದ್ದು ಮಾಡುವ ಮುನ್ನ ಸುಪ್ರೀಂ ಕೋರ್ಟ್ ಹೇಳಿದ್ದೇನು.?

ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಆರೋಪಿ ಎಷ್ಟೇ ದೊಡ್ಡವರಿದ್ದರೂ ಅವರು ಕಾನೂನಿಗಿಂತ ದೊಡ್ಡವರಲ್ಲ. ಕಾನೂನು ಆಡಳಿತ ಎತ್ತಿ ಹಿಡಿಯಲಾಗಿದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್ ಮೆಂಟ್ ನೀಡಲಾಗಿದೆ.ಜೈಲು ಸೂಪರಿಂಟೆಂಡ್ನನ್ನು ಸಸ್ಪೆಂಡ್ ಮಾಡಬೇಕಿತ್ತು’ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಈ ತೀರ್ಪು ಲ್ಯಾಂಡ್ ಮಾರ್ಕ್ ತೀರ್ಪೆಂದು ಸುಪ್ರೀಂಕೋರ್ಟ್ ಹೇಳಿದೆ. ತಕ್ಷಣವೇ ದರ್ಶನ್ ಹಾಗೂ ಇತರ ಆರೋಪಿಗಳನ್ನು ಜೈಲಿಗೆ ಕಳುಹಿಸಬೇಕೆಂದು ಆದೇಶ ಬಂದಿದೆ.
ನಟ ದರ್ಶನ್ ಮತ್ತೆ ಜೈಲಿಗೆ.

ಕಳೆದ ವರ್ಷ ಜೂನ್ 11ರಂದು ದರ್ಶನ್ ರೇಣುಕಾಸ್ವಾಮಿ ಹತ್ಯೆ ಕೇಸಿನಲ್ಲಿ ಮೈಸೂರಿನಲ್ಲಿ ಬಂಧನಕ್ಕೆ ಒಳಗಾದರು. ಆ ಬಳಿಕ ನಾಲ್ಕು ತಿಂಗಳಿಗೂ ಅಧಿಕ ಸಮಯ ಅವರು ಜೈಲಿನಲ್ಲಿ ಇರಬೇಕಾದ ಸ್ಥಿತಿ ಬಂದೊದಗಿತ್ತು. ಆ ಬಳಿಕ ಬೆನ್ನು ನೋವಿನ ಕಾರಣ ನೀಡಿ ಜೈಲಿನಿಂದ ಹೊರಬಂದರು. ಡಿಸೆಂಬರ್ನಲ್ಲಿ ಅವರಿಗೆ ಸಂಪೂರ್ಣ ಜಾಮೀನು ದೊರೆಯಿತು. ಇದನ್ನು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ ಮಾಡಿತ್ತು.
ಈ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ಮಾತ್ರ ಸೂಕ್ತ ವೇದಿಕೆ. ವಿಧಿವಿಜ್ಞಾನ ಸಾಕ್ಷ್ಯಗಳೊಂದಿಗೆ ಸೇರಿಕೊಂಡು ಸುಸ್ಥಾಪಿತ ಆರೋಪಗಳು ಜಾಮೀನು ರದ್ದತಿಯನ್ನು ಮತ್ತೆ ಜಾರಿಗೆ ತರುತ್ತವೆ, ಅರ್ಜಿದಾರರಿಗೆ ಜಾಮೀನು ರದ್ದುಗೊಂಡಿದೆ ಎಂದು ಪೀಠ ಹೇಳಿದೆ.
ದರ್ಶನ್ ಮತ್ತು ಸಹ-ಆರೋಪಿಗಳಿಗೆ ಕಳೆದ ವರ್ಷ ಡಿಸೆಂಬರ್ 13ರಂದು ಹೈಕೋರ್ಟ್ ನೀಡಿದ ಜಾಮೀನು ಆದೇಶದ ವಿರುದ್ಧ ಕರ್ನಾಟಕ ಸರ್ಕಾರ ಸಲ್ಲಿಸಿದ ಮೇಲ್ಮನವಿಯ ಮೇರೆಗೆ ತೀರ್ಪು ಬಂದಿದೆ.

ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ 33 ವರ್ಷದ ರೇಣುಕಾಸ್ವಾಮಿ ಎಂಬ ದರ್ಶನ್ ಅಭಿಮಾನಿಯನ್ನು ಅಪಹರಿಸಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ ಆರೋಪ ದರ್ಶನ್, ನಟಿ ಪವಿತ್ರಾ ಗೌಡ ಮತ್ತು ಇತರರ ಮೇಲಿದೆ.
ಕಳೆದ ವರ್ಷ ಜೂನ್ 8ರಂದು ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿ ಬೆಂಗಳೂರಿನ ಶೆಡ್ನಲ್ಲಿ ಮೂರು ದಿನಗಳ ಕಾಲ ಬಂಧಿಸಿ, ಚಿತ್ರಹಿಂಸೆ ನೀಡಿ ಹತ್ಯೆ ಮಾಡಿ ಶವವನ್ನು ಚರಂಡಿಯಲ್ಲಿ ಎಸೆದು ಹೋಗಿದ್ದರು. ನಂತರ ಶವ ಸಿಕ್ಕಿತ್ತು ಎಂದು ಪೊಲೀಸರು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ರಾಜ್ಯ ಸರ್ಕಾರದ ಮನವಿಯ ಮೇರೆಗೆ ಜನವರಿ 24 ರಂದು ಸುಪ್ರೀಂ ಕೋರ್ಟ್ ನಟ ದರ್ಶನ್, ಪವಿತ್ರಾ ಗೌಡ ಮತ್ತು ಪ್ರಕರಣದಲ್ಲಿ ಇತರರಿಗೆ ನೋಟಿಸ್ ಜಾರಿ ಮಾಡಿತ್ತು. ಇದರಿಂದ ದರ್ಶನ್ ಜೈಲು ಸೇರಬೇಕಾದ ಪರಿಸ್ಥಿತಿ ಬಂದಿತ್ತು.
ಸುಪ್ರೀಂ ಕೋರ್ಟ್ ದರ್ಶನ್ ಜಾಮೀನು ರದ್ದು ಮಾಡಿದ ಹಿನ್ನೆಲೆಯಲ್ಲಿ ನಟಿ ರಮ್ಯಾ ಅವರು ಹೇಳಿದ್ದೆನು…
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರಿಗೆ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪನ್ನು ಹೊರಡಿಸಿದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ಸಂದೇಶ ರವಾನೆಯಾಗಿದೆ. ಸರಿಯಾದ ಪ್ರಕ್ರಿಯೆ ಅನುಸರಿಸಿ, ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇಡಿ. ಕಾನೂನು ಕೈಗೆ ತೆಗೆದುಕೊಳ್ಳಬೇಡಿ, ನ್ಯಾಯ ಸಿಗುತ್ತದೆ. ನಿಮ್ಮ ಅಂತರಂಗದ ಮಾತಿಗೆ ಸತ್ಯವಾಗಿರಿ. ಇದು ಮುಖ್ಯವಾಗಿದೆ.




