Big twist : ಧರ್ಮಸ್ಥಳದ ಬಂಗಲೆ ಗುಡ್ಡದಲ್ಲಿ ನಾಲ್ಕೈದು ತಲೆಬುರುಡೆ, ಸಾಕಷ್ಟು ಮೂಳೆ ಪತ್ತೆ.!

news.ashwasurya.in
ಅಶ್ವಸೂರ್ಯ/ಧರ್ಮಸ್ಥಳ :ಧರ್ಮಸ್ಥಳದ ನೂರಾರು ಹತ್ಯೆ ಆರೋಪದ ಹಿನ್ನೆಲೆಯಲ್ಲಿ ಕಾರ್ಯಚರಣೆಗೆ ಇಳಿದ ಎಸ್ಐಟಿ ಶೋಧ ತಂಡಕ್ಕೆ ಬಂಗ್ಲೆಗುಡ್ಡದಲ್ಲಿ ನಾಲ್ಕೈದು ತಲೆಬುರುಡೆ ಮತ್ತು ಸಾಕಷ್ಟು ಮೂಳೆಗಳು ಸಿಕ್ಕಿವೆಯಂತೆ.? ತಲೆಬುರುಡೆ ರಹಸ್ಯದ ಬಗ್ಗೆ ಹೈಕೋರ್ಟ್ ರಿಟ್ ಅರ್ಜಿಯಲ್ಲಿ ಸೌಜನ್ಯ ಮಾವ ವಿಠಲಗೌಡನ ಸಹೋದರ ಪುರಂದರಗೌಡ ಉಲ್ಲೇಖಿಸಿದ ಹಿನ್ನೆಲೆಯಲ್ಲಿ ಎಸ್ಐಟಿ ತಂಡ ತರಾತುರಿಯಲ್ಲಿ ಒಂದೇ ದಿನದಲ್ಲಿ ಬಂಗ್ಲೆಗುಡ್ಡದ ಕಾಡಿನಲ್ಲಿ ಅಸ್ಥಿಪಂಜರ ಅವಶೇಷಗಳ ಮಹಜರು ಪ್ರಕ್ರಿಯೆ ನಡೆಸಲು ಮುಂದಾಗಿತ್ತು. ಧರ್ಮಸ್ಥಳ ಗ್ರಾಮದ ಬುರುಡೆ ಕೇಸ್ ಈಗ ಮತ್ತೊಂದು ದೊಡ್ಡ ತಿರುವನ್ನು ಪಡೆದುಕೊಳ್ಳುತ್ತಿದೆ. ಸೌಜನ್ಯಾ ಮಾವ ವಿಠಲಗೌಡ ಹೇಳಿದಂತೆ ಬಂಗ್ಲೆಗುಡ್ಡೆಯಲ್ಲಿ ಬುಧವಾರ ಎಸ್ಐಟಿ ಶೋಧ ನಡೆಸಿದಾಗ ಭೂಮಿಯ ಮೇಲೆಯೇ ಮಾನವನ 5 ತಲೆ ಬುರುಡೆ, ಸಾಕಷ್ಟು ಮೂಳೆಗಳು ಪತ್ತೆಯಾಗಿವೆ. ವಿಠಲಗೌಡನ ಸಹೋದರ ಪುರಂದರಗೌಡ ಬಂಗಲೆಗುಡ್ಡದಲ್ಲಿ ಬುರುಡೆ ರಹಸ್ಯ ಭೇದಿಸುವ ಸಂಬಂಧ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ಸೆ.19ಕ್ಕೆ ವಿಚಾರಣೆಗೆ ಬರಲಿದೆ. ಹಾಗಾಗಿ ಎಸ್ಐಟಿ ಶೋಧ ಕೈಗೊಂಡಿದ್ದು, ಶೋಧದ ಫಲಿತಾಂಶ ಕುರಿತಂತೆ ಹೈಕೋರ್ಟ್ಗೆ ವರದಿ ನೀಡುವ ಸಾಧ್ಯತೆ ಇದೆ.

ಬಂಗ್ಲೆಗುಡ್ಡೆಯ ಐದು ಜಾಗಗಳಲ್ಲಿ ಬುಧವಾರ ಮಾನವ ಅಸ್ಥಿಪಂಜರ ಅವಶೇಷಗಳು ಪತ್ತೆಯಾಗಿದೆ. 5 ಮಾನವನ ತಲೆಬುರುಡೆ ಮತ್ತು ಸಾಕಷ್ಟು ಮೂಳೆಗಳು ಪತ್ತೆಯಾಗಿದ್ದು, ಅವುಗಳನ್ನು ಸುಕೊ ತಂಡದ ಸಹಾಯದಿಂದ ಎಸ್ಐಟಿ ಸಂಗ್ರಹಿಸಿದೆ. ವಿಶೇಷ ತನಿಖಾ ತಂಡ(ಎಸ್ಐಟಿ) ಪ್ರತ್ಯೇಕ ಮೂರು ತಂಡಗಳಾಗಿ ಶೋಧ ಕಾರ್ಯಾಚರಣೆಗೆ ಇಳಿದಿದ್ದರು. ದಿನಪೂರ್ತಿ ಶೋಧ ಕಾರ್ಯಾಚರಣೆ ನಡೆಸಿದ್ದು, ಇದು ಮರುದಿನ ಗುರುವಾರವೂ ಮುಂದುವರಿಯಲಿದೆ.
ಈ ಎಲ್ಲ ಅಸ್ಥಿಪಂಜರಗಳ ಅವಶೇಷಗಳು ಭೂಮಿಯ ಮೇಲ್ಭಾಗದಲ್ಲಿ ಪತ್ತೆಯಾಗಿದೆ. ದೊರೆತ ಮೂಳೆಗಳನ್ನು ಸೋಕೋ ತಂಡ ಸಂಗ್ರಹಿಸಿದೆ. ಅಲ್ಲಿ ಮಾನವ ದೇಹದ ಕೆಲವು ಭಾಗಗಳ ಅವಶೇಷಗಳು, ಬಟ್ಟೆಗಳ ತುಂಡು ಪತ್ತೆಯಾಗಿದೆ. ಸಂಜೆ ವೇಳೆ ಅಂಗಿ, ಪ್ಯಾಂಟ್, ಸೀರೆ, ಊರುಗೋಲು ಹಾಗೂ ಲೈಸೆನ್ಸ್ ಪತ್ತೆಯಾಗಿದ್ದು, ಅವುಗಳ ಮಹಜರು ಪ್ರಕ್ರಿಯೆ ನಡೆಸಲಾಗಿದೆ. ಸೌಜನ್ಯಾ ಮಾವ ವಿಠಲಗೌಡ ಎಸ್ಐಟಿ ತಂಡಕ್ಕೆ ವಿಚಾರಣೆ ವೇಳೆ ನೀಡಿದ ಮಾಹಿತಿಯಂತೆ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ದಿನಪೂರ್ತಿ ಈ ಮಹಜರು ಕಾರ್ಯ ನಡೆಸಲಾಗಿದೆ.
ಬಂಗ್ಲೆಗುಡ್ಡದೊಳಗೆ ಪ್ಲಾಸ್ಟಿಕ್ ಪೈಪ್, ಉಪ್ಪು, ಪ್ಲಾಸ್ಟಿಕ್ ಬಾಕ್ಸ್ಗಳು, ಸೀಲ್ ಮಾಡುವ ಬಟ್ಟೆಗಳು, ಸೀಲ್ ಹಾಕುವ ಮೇಣದ ಜೊತೆ ಸೋಕೋ ಸಿಬ್ಬಂದಿ ತೆರಳಿದ್ದು, ಮಹಜರು ಕಾರ್ಯಕ್ಕೆ ನೆಡೆಸಿದ್ದಾರೆ. ಎಸ್ಐಟಿ ತನಿಖಾಧಿಕಾರಿ ಎಸ್ಪಿ ಜಿತೇಂದ್ರ ದಯಾಮ ನೇತೃತ್ವದಲ್ಲಿ ಸೋಕೋ ತಂಡ, ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ, ಮೆಟಲ್ ಡಿಟೆಕ್ಟರ್ ತಂಡ ಸಾಥ್ ನೀಡಿದೆ. ಅರಣ್ಯ ಇಲಾಖೆ ಅನುಮತಿ ಪಡೆದು ಎಸ್ಐಟಿ ತಂಡ ನೇತ್ರಾವತಿ ಸ್ನಾನಘಟ್ಟದ ಬಳಿಯ ಅರಣ್ಯ ಪ್ರವೇಶದಿಂದಲೇ ಶೋಧ ಆರಂಭಿಸಿದೆ. ಸುಮಾರು 12 ಎಕರೆ ವಿಸ್ತೀರ್ಣದಲ್ಲಿರುವ ಬಂಗ್ಲೆಗುಡ್ಡ ಅರಣ್ಯವನ್ನು ಎಸ್ಐಟಿ ಸಂಪೂರ್ಣ ಶೋಧಿಸಲಿದೆ ಎಂದು ತಿಳಿದುಬಂದಿದೆ.

ಶೋಧ ಕಾರ್ಯ ಮುಗಿದ ಬಳಿಕ ಹೈಕೋರ್ಟ್ಗೆ ವರದಿ.?
ಬಂಗ್ಲೆಗುಡ್ಡದಲ್ಲಿನ ತಲೆಬುರುಡೆ ರಹಸ್ಯದ ಬಗ್ಗೆ ಹೈಕೋರ್ಟ್ ರಿಟ್ ಅರ್ಜಿಯಲ್ಲಿ ಸೌಜನ್ಯ ಮಾವ ವಿಠಲಗೌಡನ ಸಹೋದರ ಪುರಂದರಗೌಡ ಉಲ್ಲೇಖಿಸಿದ ಹಿನ್ನೆಲೆಯಲ್ಲಿ ಎಸ್ಐಟಿ ತಂಡ ತರಾತುರಿಯಲ್ಲಿ ಒಂದೇ ದಿನದಲ್ಲಿ ಬಂಗ್ಲೆಗುಡ್ಡದ ಕಾಡಿನಲ್ಲಿ ಅಸ್ಥಿಪಂಜರ ಅವಶೇಷಗಳ ಮಹಜರು ಪ್ರಕ್ರಿಯೆ ನಡೆಸಲು ಉದ್ದೇಶಿಸಿತ್ತು. ಆದರೆ ಇಡೀ ಕಾಡಿನಲ್ಲಿ ಶೋಧ ಕಾರ್ಯ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ 2ನೇ ದಿನವೂ ಮುಂದುವರಿಸುವುದು ಅನಿವಾರ್ಯವಾಗಿದೆ.
ಬಂಗ್ಲೆಗುಡ್ಡದ ತಲೆಬುರುಡೆ ರಹಸ್ಯ ಪತ್ತೆಗೆ ಇನ್ನೂ ಯಾವುದೇ ನಿರ್ದಿಷ್ಟ ಕ್ರಮ ಕೈಗೊಂಡಿಲ್ಲ ಎಂದು ಈ ಹಿಂದೆ ಪುರಂದರಗೌಡ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಎಸ್ಐಟಿಗೆ ನೋಟಿಸ್ ಜಾರಿಗೊಳಿಸಿತ್ತು. ಹೈಕೋರ್ಟ್ ನೋಟಿಸ್ ಬೆನ್ನಲ್ಲೇ ಎಸ್ಐಟಿ ಬಂಗ್ಲೆಗುಡ್ಡದ ಅಸ್ಥಿಪಂಜರ ಶೋಧಕ್ಕಿಳಿದಿದೆ. ಸೆ.18ರಂದು ಹೈಕೋರ್ಟ್ಗೆ ವರದಿ ಸಲ್ಲಿಸಬೇಕಾದ ಹಿನ್ನೆಲೆಯಲ್ಲಿ ಬಂಗ್ಲೆಗುಡ್ಡದ ಅಸ್ಥಿಪಂಜರ ಶೋಧ ಕಾರ್ಯಾಚರಣೆಯನ್ನು ಬಿಗಿಗೊಳಿಸಲಾಗಿತ್ತು. ಶೋಧ ಕಾರ್ಯ ಪೂರ್ಣಗೊಂಡ ಬಳಿಕವೇ ಹೈಕೋರ್ಟ್ಗೆ ವರದಿ ಸಲ್ಲಿಸುವ ಸಾಧ್ಯತೆ ಇದೆ. ಹೈಕೋರ್ಟ್ಗೆ ಪುರಂದರಗೌಡ ಸಲ್ಲಿಸಿದ ರಿಟ್ ಅರ್ಜಿಯಲ್ಲಿ ಬಂಗ್ಲೆಗುಡ್ಡ ರಹಸ್ಯದ ಬಗ್ಗೆ ಹಲವು ವಿಚಾರಗಳನ್ನು ಉಲ್ಲೇಖಿಸಲಾಗಿತ್ತು.
ಒಟ್ಟಿನಲ್ಲಿ ಧರ್ಮಸ್ಥಳದ ಬುರುಡೆ ಪ್ರಕರಣ ದಿನಕ್ಕೊಬ್ಬರನ್ನು ಅನುಮಾನದಿಂದ ನೋಡುವಂತೆ ಮಾಡಿದೆ ಇಲ್ಲಿ ಯಾವುದು ಸತ್ಯ ಅಸತ್ಯ ಎನ್ನುವುದು ಮಾತ್ರ ಇನ್ನೂ ನಿಗೂಢವಾಗಿದೆ. ಈಗ ಸಿಕ್ಕ ಅಸ್ಥಿಪಂಜರದ ಮೂಳೆಗಳು ಮತ್ತು ತಲೆಬುರುಡೆಗಳ ಏನು ಎನ್ನುವುದು ಎಸ್ಐಟಿ ತನಿಖೆಯಿಂದ ಬಯಲಾಗಬೇಕಿದೆ.?


