ಮೂಡುಬಿದಿರೆ : ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಸುಳ್ಳು: ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ.
news.ashwasurya.in
ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಸುಳ್ಳು, ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ..
ಅಶ್ವಸೂರ್ಯ/ಮಂಗಳೂರು : ಮೂಡುಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಇತ್ತೀಚೆಗೆ ಕೇಳಿಬಂದಿದ್ದ ಲೈಂಗಿಕ ಕಿರುಕುಳದ ಆರೋಪಗಳು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಸುಮತಿ ನಾಯ್ಕ್ ಮತ್ತು ಅವಿತಾ ಮಿನೇಜಸ್ ಎಂಬುವವರು ನೀಡಿದ್ದ ದೂರುಗಳ ಕುರಿತು ನಡೆಸಲಾದ ಸಮಗ್ರ ಪ್ರಾಥಮಿಕ ತನಿಖೆಯಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂಬುದು ದೃಢಪಟ್ಟಿದೆ. ಅಧಿಕಾರಿಯನ್ನು ಉದ್ದೇಶಪೂರ್ವಕವಾಗಿ ಸಿಲುಕಿಸಲು ಈ ಸುಳ್ಳು ದೂರುಗಳನ್ನು ನೀಡಲಾಗಿದೆ ಎಂದು ತನಿಖಾ ವರದಿಯಿಂದ ತಿಳಿದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆಡಿಯೋ ಮತ್ತು ವಿಡಿಯೋಗಳಲ್ಲಿರುವ ಮಹಿಳೆಯರು, ಅವು ತಮ್ಮದೇ ಎಂದು ಒಪ್ಪಿಕೊಂಡಿದ್ದರೂ ಅಧಿಕಾರಿಯ ವಿರುದ್ಧ ಅಧಿಕೃತ ದೂರು ನೀಡಲು ನಿರಾಕರಿಸಿದ್ದಾರೆ. ಈ ವಿಡಿಯೋಗಳನ್ನು ವಿನೋದ್ ಪಿಂಟೋ ಮತ್ತು ಇತರರು ತಮ್ಮ ವೈಯಕ್ತಿಕ ಹಿತಾಸಕ್ತಿ ಹಾಗೂ ದ್ವೇಷ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾರೆ ಎಂಬ ಅಂಶ ತನಿಖೆಯಲ್ಲಿ ಬಹಿರಂಗವಾಗಿದೆ. ಪ್ರಸ್ತುತ ಲೈಂಗಿಕ ಕಿರುಕುಳದ ಆರೋಪಗಳು ಸಾಬೀತಾಗದಿದ್ದರೂ, ಆಡಿಯೋ-ವಿಡಿಯೋಗಳಲ್ಲಿ ಕಂಡುಬಂದಿರುವ ಅಧಿಕಾರಿಯ ನೈಜ ದುರ್ನಡತೆಯನ್ನು ಇಲಾಖೆ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.

ಅಧಿಕಾರಿಯ ಹಳೆಯ ತಪ್ಪುಗಳು ಹಾಗೂ ನಡವಳಿಕೆಯ ಹಿನ್ನೆಲೆಯಲ್ಲಿ ಈಗಾಗಲೇ ಇಲಾಖಾ ಮಟ್ಟದ ಶಿಸ್ತುಕ್ರಮ ಕೈಗೊಳ್ಳಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ. ಠಾಣೆಗೆ ಬರುವ ಮಹಿಳೆಯರ ರಕ್ಷಣೆ ಮತ್ತು ಗೌರವ ಕಾಪಾಡುವುದು ಪೊಲೀಸರ (ಆರಕ್ಷಕರ) ಆದ್ಯ ಕರ್ತವ್ಯವಾಗಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗುವುದು. ಅದೇ ಸಮಯದಲ್ಲಿ, ವೈಯಕ್ತಿಕ ದ್ವೇಷಕ್ಕಾಗಿ ಸುಳ್ಳು ದೂರುಗಳನ್ನು ನೀಡಿ ತನಿಖಾ ಹಾದಿ ತಪ್ಪಿಸುವವರ ವಿರುದ್ಧವೂ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.


