ನ್ಯಾಯಾಧೀಶರುಗಳ ವರ್ಗಾವಣೆ : ಶಾಸಕ ವಿನಯ್ ಕುಲಕರ್ಣಿ ಕೇಸ್ ತೀರ್ಪು ಬೆನ್ನಲ್ಲೇ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ವರ್ಗಾವಣೆ!
news.ashwasurya.in
ಅಶ್ವಸೂರ್ಯ/ಬೆಂಗಳೂರು : ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಜಡ್ಜ್ ಆಗಿ ಕಾರ್ಯನಿರ್ವಹಿಸುತ್ತಿದ್ದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರನ್ನು ಬೆಂಗಳೂರು ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ. ಯೋಗೇಶ್ ಗೌಡ ಕೊಲೆ ಪ್ರಕರಣದ ವಿಚಾರಣೆ ನಡೆಸಿದ್ದ ಸಂತೋಷ್ ಗಜಾನನ ಭಟ್ ಅವರು ನಿನ್ನೆ ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳನ್ನು ದೋಷಿಗಳು ಎಂದು ತೀರ್ಪು ನೀಡಿದ್ದರು. ಇದರ ಬೆನ್ನಲ್ಲೇ ಈ ನ್ಯಾಯಾಧೀಶರ ವರ್ಗಾವಣೆಯಾಗಿದೆ.
ನ್ಯಾ. ಸಂತೋಷ್ ಗಜಾನನ ಭಟ್ ಸೇರಿ ರಾಜ್ಯದ 114 ಜಡ್ಜ್ಗಳ ವರ್ಗಾವಣೆಯಾಗಿದೆ. ರಾಜ್ಯಾದ್ಯಂತ ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ಏಕಕಾಲಕ್ಕೆ ವರ್ಗಾವಣೆಗೊಳಿಸಿ (Judges Transfer) ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಮಹತ್ವದ ಆದೇಶ ಹೊರಡಿಸಿದ್ದಾರೆ. ಈ ವರ್ಗಾವಣೆ ಪ್ರಕ್ರಿಯೆಯಲ್ಲಿ ಪ್ರಮುಖವಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ (Justice Santhosh Gajanan Bhat) ವರ್ಗಾವಣೆ ಗಮನ ಸೆಳೆದಿದೆ. ಇವರು ಶಾಸಕ ವಿನಯ್ ಕುಲಕರ್ಣಿ ಸೇರಿ ಹಲವು ಹೈಪ್ರೊಫೈಲ್ ರಾಜಕಾರಣಿಗಳಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಯನ್ನು ನಡೆಸುತ್ತಿದ್ದರು ಎಂಬುದು ಗಮನಾರ್ಹವಾಗಿದೆ.
ಜನಪ್ರತಿನಿಧಿಗಳ ಕೋರ್ಟ್ ಜಡ್ಜ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸಂತೋಷ್ ಗಜಾನನ ಭಟ್ ಅವರನ್ನು ಬೆಂಗಳೂರು ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ. ಯೋಗೇಶ್ ಗೌಡ ಕೊಲೆ ಪ್ರಕರಣದ ವಿಚಾರಣೆ ನಡೆಸಿದ್ದ ಸಂತೋಷ್ ಗಜಾನನ ಭಟ್ ಅವರು ನಿನ್ನೆ ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳನ್ನು ದೋಷಿಗಳು ಎಂದು ತೀರ್ಪು ನೀಡಿದ್ದರು. ಈ ಪ್ರಕರಣದಲ್ಲಿ ನಾಳೆ ಶಿಕ್ಷೆ ಪ್ರಮಾಣ ಪ್ರಕಟವಾಗಬೇಕಿತ್ತು. ಈ ನಡುವೆ ಸಂತೋಷ್ ಗಜಾನನ ಭಟ್ ವರ್ಗಾವಣೆಯಾಗಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಆದರೆ, ಪ್ರತಿವರ್ಷದಂತೆ ನಡೆಯುವ ಸಾಮಾನ್ಯ ವಾರ್ಷಿಕ ವರ್ಗಾವಣೆ ಪ್ರಕ್ರಿಯೆಯ ಭಾಗವಾಗಿ ಈ ವರ್ಗಾವಣೆ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ವರ್ಗಾವಣೆಗೊಂಡಿರುವ ಎಲ್ಲಾ ನ್ಯಾಯಾಧೀಶರು ಜೂನ್ 1 ರಿಂದಲೇ ಅನ್ವಯವಾಗುವಂತೆ ತಮ್ಮ ಹೊಸ ಕಾರ್ಯಕ್ಷೇತ್ರಗಳಲ್ಲಿ ಜವಾಬ್ದಾರಿ ವಹಿಸಿಕೊಳ್ಳಲು ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.
ಸಂತೋಷ್ ಗಜಾನನ ಭಟ್ ಅವರ ವರ್ಗಾವಣೆಯಿಂದ ತೆರವಾದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಸ್ಥಾನಕ್ಕೆ ಕೆ.ಬಿ. ಶಿವಪ್ರಸಾದ್ ಅವರನ್ನು ನೇಮಿಸಲಾಗಿದೆ. ಶಿವಪ್ರಸಾದ್ ಅವರು ಪ್ರಸ್ತುತ ಮಂಡ್ಯದ 1ನೇ ಜಿಲ್ಲಾ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದು, ಜೂನ್ನಿಂದ ಬೆಂಗಳೂರಿನಲ್ಲಿ ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಚಾರಣೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ರಾಜ್ಯದ ಪ್ರಮುಖ ರಾಜಕೀಯ ಬೆಳವಣಿಗೆಗಳ ದೃಷ್ಟಿಯಿಂದ ಈ ಹುದ್ದೆಯ ನೇಮಕಾತಿ ಅತ್ಯಂತ ಪ್ರಮುಖವಾಗಿದೆ.
ಇನ್ನೂ ಹೈಕೋರ್ಟ್ ಆಡಳಿತಾತ್ಮಕ ವಿಭಾಗದಲ್ಲೂ ಬದಲಾವಣೆಗಳಾಗಿದ್ದು, ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಆಗಿದ್ದ ಕೆ.ಎಸ್. ಭರತ್ ಕುಮಾರ್ ಅವರನ್ನು ಬೆಂಗಳೂರಿನ ಪ್ರಧಾನ ಜಿಲ್ಲಾ ನ್ಯಾಯಾಧೀಶರನ್ನಾಗಿ ನೇಮಕ ಮಾಡಲಾಗಿದೆ. ಇವರ ವರ್ಗಾವಣೆಯಿಂದ ತೆರವಾದ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಹುದ್ದೆಗೆ ಎಂ. ಚಂದ್ರಶೇಖರ ರೆಡ್ಡಿ ಅವರನ್ನು ನೇಮಿಸಿ ಹೈಕೋರ್ಟ್ ಆದೇಶಿಸಿದೆ. ಈ ಇಬ್ಬರೂ ಹಿರಿಯ ಅಧಿಕಾರಿಗಳು ನ್ಯಾಯಾಂಗದ ಆಡಳಿತದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ.
ಒಟ್ಟಾರೆಯಾಗಿ 114 ಜಿಲ್ಲಾ ನ್ಯಾಯಾಧೀಶರ ಈ ವರ್ಗಾವಣೆಯು ನ್ಯಾಯಾಂಗದ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಳ್ಳಲಾದ ಕ್ರಮವಾಗಿದೆ. ಹಾಲಿ ರಿಜಿಸ್ಟ್ರಾರ್ ಜನರಲ್ ಕೆ.ಎಸ್. ಭರತ್ ಕುಮಾರ್ ಅವರು ವರ್ಗಾವಣೆ ಆದೇಶ ಹೊರಡಿಸಿದ್ದು, ಜೂನ್ ಮೊದಲ ವಾರದಿಂದ ರಾಜ್ಯದ ವಿವಿಧ ಜಿಲ್ಲಾ ನ್ಯಾಯಾಲಯಗಳಲ್ಲಿ ನೂತನ ನ್ಯಾಯಾಧೀಶರು ಕಾರ್ಯಾರಂಭ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.


