
ಕೊಪ್ಪಳ : ಗಂಗಾವತಿ ಬಿಜೆಪಿ ಮುಖಂಡ ವೆಂಕಟೇಶ ಹತ್ಯೆ ಪ್ರಕರಣ 6 ಹಂತಕರಿಗೆ ಗಲ್ಲು ಶಿಕ್ಷೆ.
news.ashwasurya.in

ಹತ್ಯೆ ಪ್ರಕರಣದಲ್ಲಿ ದೋಷಿಗಳೆಂದು ಸಾಬೀತಾದ ಆರು ಜನರಿಗೆ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿ ಗುರುವಾರ ಆದೇಶ ಹೊರಡಿಸಿದೆ. ಕೊಪ್ಪಳ, (ಏಪ್ರಿಲ್ 30): ಗಂಗಾವತಿ (Gangavathi) ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿ ಕೊಲೆ ಪ್ರಕರಣದ (Venkatesh Kurbur Murder Case) ಆರು ಜನ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜೊತೆ ದಂಡ ವಿಧಿಸಲಾಗಿದೆ…
ಅಶ್ವಸೂರ್ಯ/ಕೊಪ್ಪಳ : ಬಿಜೆಪಿ ಯುವ ಮೋರ್ಚಾದ ಗಂಗಾವತಿ ನಗರ ಘಟಕದ ಅಧ್ಯಕ್ಷರಾಗಿದ್ದ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿಯ ಕೊಲೆ ಪ್ರಕರಣದಲ್ಲಿ ಆಪರಾದಿಗಳಾಗಿದ್ದ 6 ಮಂದಿಗೆ ಗಲ್ಲು ಶಿಕ್ಷೆ ವಿಧಿಸಿ ಗಂಗಾವತಿ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ. ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್ ಶಿಕ್ಷೆ ತೀರ್ಪು ಪ್ರಕಟಿಸಿದರು. ರವಿ, ಮೈಲಾರಿ, ಧನರಾಜ್, ಭೀಮಾ, ಸಲೀಂ ಮಹಮ್ಮದ್ ರಫೀಕ್ ಮತ್ತು ಗಂಗಾಧರ ಗೌಳಿ ಶಿಕ್ಷೆಗೊಳಗಾದ ಅಪರಾಧಿಗಳು.
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿಯ ಫೂಟೇಜ್ಗಳನ್ನು ಪರಿಶೀಲಿಸಿದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್, ಅಪರಾಧಿಗಳು ಈ ಹಿಂದೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾದ ಹಿನ್ನೆಲೆಯ ಬಗ್ಗೆಯೂ ವಿಚಾರಣೆ ನಡೆಸಿ ಈ ತೀರ್ಪು ಪ್ರಕಟಿಸಿದರು.

ಪ್ರಕರಣದ ಹಿನ್ನೆಲೆ ;
ಕೊಪ್ಪಳ ನಗರದ ಹೊರ ವಲಯದಲ್ಲಿರುವ ರಾಣಾ ಪ್ರತಾಪ್ ಸಿಂಗ್ ವೃತ್ತದಲ್ಲಿರುವ ಖಾಸಗಿ ಆಸ್ಪತ್ರೆಯ ಬಳಿ 2025ರ ಅಕ್ಟೋಬರ್ 8ರ ಮಧ್ಯರಾತ್ರಿ ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ (32) ಅವರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ ಅಪರಾಧಿಗಳು ಸ್ಥಳದಿಂದ ಎಸ್ಕೇಪ್ ಆಗಿದ್ದರು.
ಊಟ ಮುಗಿಸಿಕೊಂಡು ಸ್ನೇಹಿತರೊಂದಿಗೆ ದ್ವಿಚಕ್ರ ವಾಹನದಲ್ಲಿ ವೆಂಕಟೇಶ್ ತೆರಳುತ್ತಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ರವಿ, ಮೈಲಾರಿ, ಧನರಾಜ್, ಭೀಮಾ, ಸಲೀಂ ಮತ್ತು ಗಂಗಾಧರ ಗೌಳಿಯನ್ನು ಒಳಗೊಂಡ ಗ್ಯಾಂಗ್ ವೆಂಕಟೇಶ ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಗುದ್ದಿ ಕೆಳಕ್ಕೆ ಬಿಳಿಸಿ ಬಳಿಕ ಆತನ ಮೇಲೆ ಮಾರಕಾಸ್ತ್ರಗಳಿಂದ ಮನಸ್ಸೊಇಚ್ಚೆ ದಾಳಿ ಮಾಡಿ ಕೊಲೆ ಮಾಡಿದ್ದರು.

ಕೊಲೆಗೆ ಕಾರಣವೇನು?
ವೆಂಕಟೇಶ ಕೊಲೆಯ ಹಿಂದಿನ ಮತ್ತೊಂದು ಕೃತ್ಯವೂ ಬೆಳಕಿಗೆ ಬಂದಿದೆ. ಗಂಗಾವತಿಯ ರೈಲ್ವೆ ನಿಲ್ದಾಣದ ಬಳಿ ನಡೆದಿದ್ದ ಮಾರುತಿ ಎಂಬ ಯುವಕನ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಪ್ರಕರಣದಲ್ಲಿ ವೆಂಕಟೇಶ ಪ್ರತ್ಯಕ್ಷ ಸಾಕ್ಷಿಯಾಗಿದ್ದರು. ಅಲ್ಲದೇ ಮಾರುತಿಯ ಚಿಕಿತ್ಸೆಗೆ ಕೊನೆಯವರೆಗೂ ಬೆಂಬಲವಾಗಿ ನಿಂತಿದ್ದರು ಎಂಬ ಕಾರಣಕ್ಕೆ ವೆಂಕಟೇಶನನ್ನು ಕೊಲೆ ಮಾಡಲಾಗಿತ್ತು. ಸದ್ಯ ನ್ಯಾಯಾಲಯ ಹಂತಕರಿಗೆ ಗಲ್ಲು ಶಿಕ್ಷೆ ನೀಡಿ ಆದೇಶಿಸಿದೆ.


