ತೀರ್ಥಹಳ್ಳಿ ರಂಜದಕಟ್ಟೆ ಅಡಿಕೆ ಕಳ್ಳರು ಅಂದರ್.! ಹಾವೇರಿಯ ಇಬ್ಬರು ಆರೋಪಿಗಳಿಂದ 4.50 ಲಕ್ಷ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ ಪಡೆದ ಪೋಲಿಸರು.!
news.ashwasurya.in
ಅಶ್ವಸೂರ್ಯ/ತೀರ್ಥಹಳ್ಳಿ : ತೀರ್ಥಹಳ್ಳಿ ತಾಲೂಕಿನ ರಂಜದಕಟ್ಟೆ ಗ್ರಾಮದಲ್ಲಿ ಕೇಲವು ದಿನಗಳ ಹಿಂದೆ ನಡೆದಿದ್ದ ಸರಣಿ ಅಡಿಕೆ ಕಳ್ಳತನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ ಮೂಲದ ಇಬ್ಬರು ಅಂತರ ಜಿಲ್ಲಾ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆರೋಪಿಗಳಿಂದ ಸುಮಾರು 4.50 ಲಕ್ಷ ರೂಪಾಯಿ ಮೌಲ್ಯದ ಅಡಿಕೆ ಹಾಗೂ ಕೃತ್ಯಕ್ಕೆ ಬಳಸಿದ್ದ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಧಿತರು ಹಾವೇರಿ ಮೂಲದವರು.!
ಬಂಧಿತ ಆರೋಪಿಗಳನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವ ಮೂಲದ ಮೆಹಬೂಬ್ ಸಾಬ್ ಮತ್ತು ಖಾಸಿಂ ಸಾಬ್ ಎಂದು ಗುರುತಿಸಲಾಗಿದೆ. ಇವರು ಗ್ರಾಮೀಣ ಭಾಗದ ಒಂಟಿ ಮನೆಗಳು ಹಾಗೂ ಅಡಿಕೆ ಗೋಡೌನ್ಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ನಡೆಸುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ರಂಜದಕಟ್ಟೆಯಲ್ಲಿ ಮೇ 4ರಂದು ನಡೆದಿದ್ದ ಅಡಿಕೆ ಕಳ್ಳತನ:
ಮೇ 4 ರಂದು ತೀರ್ಥಹಳ್ಳಿ ತಾಲೂಕಿನ ರಂಜದಕಟ್ಟೆ ಗ್ರಾಮದ ಪ್ರಸಿದ್ಧ ಅಡಿಕೆ ವ್ಯಾಪಾರಿಯಾದ ಅಶ್ರಫ್ ಎಂಬುವವರ ಮನೆಯಲ್ಲಿ ಈ ಕಳ್ಳತನ ನಡೆದಿತ್ತು. ಅಶ್ರಫ್ ಅವರು ತಮ್ಮ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಅಡಿಕೆಯನ್ನು ಖದೀಮರು ರಾತ್ರೋರಾತ್ರಿ ಕದ್ದು ಪರಾರಿಯಾಗಿದ್ದರು. ಈ ಕುರಿತು ಅಶ್ರಫ್ ಅವರು ತೀರ್ಥಹಳ್ಳಿ ಪೊಲೀಸ್ ಠಾಣೆಗೆ ತೆರಳಿ ಅಧಿಕೃತ ದೂರು ದಾಖಲಿಸಿದ್ದರು. ಅಡಿಕೆ ಬೆಲೆ ಗಗನಕ್ಕೇರುತ್ತಿರುವ ಈ ಸಮಯದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮಾಲು ಕಳುವಾಗಿದ್ದು ಸ್ಥಳೀಯ ಅಡಿಕೆ ಬೆಳೆಗಾರರು ಹಾಗೂ ವ್ಯಾಪಾರಿಗಳಲ್ಲಿ ಆತಂಕ ಮೂಡಿಸಿತ್ತು.
ಇನ್ಸ್ಪೆಕ್ಟರ್ ಇಮ್ರಾನ್ ಬೇಗ್ ನೇತೃತ್ವದಲ್ಲಿ
ಕಾರ್ಯಾಚರಣೆಗೆ ಇಳಿದ ಪೊಲೀಸರ ತಂಡ.:
ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಐಪಿಎಸ್ ಅವರ ಮಾರ್ಗದರ್ಶನದಲ್ಲಿ, ತೀರ್ಥಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಇಮ್ರಾನ್ ಬೇಗ್ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ತಾಂತ್ರಿಕ ಸೂಕ್ಷ್ಮ ಸುಳಿವುಗಳು ಹಾಗೂ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ಕೈಗೊಂಡ ಇನ್ಸ್ಪೆಕ್ಟರ್ ಇಮ್ರಾನ್ ಬೇಗ್ ಮತ್ತು ಸಿಬ್ಬಂದಿಗಳ ತಂಡ, ಅಂತಿಮವಾಗಿ ಹಾವೇರಿ ಮೂಲದ ಇಬ್ಬರು ಆರೋಪಿಗಳನ್ನು ಹೆಡೆಮುರಿ ಕಟ್ಟಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಆರೋಪಿಗಳಿಂದ 4.50 ಲಕ್ಷ ಮೌಲ್ಯದ ಅಡಿಕೆ ಜಪ್ತಿ:
ಬಂಧಿತ ಆರೋಪಿಗಳಿಂದ ಪೊಲೀಸರು ಅಶ್ರಫ್ ಅವರ ಮನೆಯಿಂದ ಕಳವು ಮಾಡಲಾಗಿದ್ದ ಸುಮಾರು 9 ಕ್ವಿಂಟಾಲ್ ತೂಕದ ಅಡಿಕೆಯನ್ನು ಜಪ್ತಿ ಮಾಡಿಕೊಳ್ಳುವುದರ ಜೋತೆಗೆ ಕಳ್ಳತನಕ್ಕೆ ಬಳಸಿದ್ದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಳ್ಳಲಾದ ಅಡಿಕೆಯ ಒಟ್ಟು ಮಾರುಕಟ್ಟೆ ಮೌಲ್ಯ ಸುಮಾರು 4.50 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.
ಸದ್ಯಕ್ಕೆ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಈ ಅಡಿಕೆ ಕಳ್ಳತನದ ಜಾಲದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರ.? ಮತ್ತು ಶಿವಮೊಗ್ಗ ಜಿಲ್ಲೆಯ ಇತರೆಡೆ ನಡೆದಿರುವ ಅಡಿಕೆ ಕಳ್ಳತನ ಪ್ರಕರಣಗಳಿಗೂ ಇವರಿಗೂ ಏನಾದರೂ ಸಂಭಂದ ಇರಬಹುದಾ ಎಂಬ ನಿಟ್ಟಿನಲ್ಲಿ ತೀರ್ಥಹಳ್ಳಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಪೊಲೀಸರ ಈ ಶೀಘ್ರ ಕಾರ್ಯಾಚರಣೆಗೆ ತೀರ್ಥಹಳ್ಳಿಯ ಸಾರ್ವಜನಿಕರು ಹಾಗೂ ಅಡಿಕೆ ವರ್ತಕರು ಅಭಿನಂದಿಸಿದ್ದಾರೆ.


