ಬೆಂಗಳೂರು : ರಾಜ್ಯದ ಜನತೆಗೆ ಗುಡ್ ನ್ಯೂಸ್ ; ಜನರ ಸಮಸ್ಯೆ ಪರಿಹಾರಕ್ಕೆ ಹೊಸ ‘ಪ್ರಜಾಸೇವೆ’ ಇಲಾಖೆ ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್.

news.ashwasurya.in
ಅಶ್ವಸೂರ್ಯ/ಬೆಂಗಳೂರು : ರಾಜ್ಯದ ಜನರು ತಮ್ಮ ಸಮಸ್ಯೆಗಳು, ಬೇಡಿಕೆಗಳು ಹಾಗೂ ದೂರುಗಳನ್ನು ಪರಿಹರಿಸಿಕೊಳ್ಳಲು ಇನ್ನು ಮುಂದೆ ಸರ್ಕಾರಿ ಕಚೇರಿಗಳ ಸುತ್ತ ಅಲೆದಾಡಬೇಕಾಗಿಲ್ಲ. ಜನರ ಅಹವಾಲುಗಳಿಗೆ ತ್ವರಿತ ಸ್ಪಂದನೆ ನೀಡುವ ಉದ್ದೇಶದಿಂದ ‘ಪ್ರಜಾಸೇವೆ’ ಎಂಬ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಜೊತೆಗೆ ಸಾರ್ವಜನಿಕರ ಅಹವಾಲುಗಳನ್ನು ಆಲಿಸಲು ವಿಶೇಷ ಸಚಿವರನ್ನೂ ನೇಮಿಸಲಾಗುವುದು ಎಂದು ತಿಳಿಸಿದ್ದಾರೆ.
ಹೌದು. ಸಚಿವ ಸಂಪುಟ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು. ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರಿಗೆ ಬಂದು ಪ್ರತಿಭಟನೆ, ಮನವಿ ಹಾಗೂ ಬೇಡಿಕೆಗಳನ್ನು ಸಲ್ಲಿಸುವ ಜನರ ಸಮಸ್ಯೆಗಳನ್ನು ಆಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಪ್ರತ್ಯೇಕ ವ್ಯವಸ್ಥೆ ಅಗತ್ಯವಿದೆ ಎಂದು ಅವರು ಹೇಳಿದರು.
ಪ್ರತಿದಿನ ಹಲವಾರು ಸಂಘಟನೆಗಳು ಹಾಗೂ ಸಾರ್ವಜನಿಕರು ತಮ್ಮ ಬೇಡಿಕೆಗಳೊಂದಿಗೆ ಸರ್ಕಾರದ ಗಮನ ಸೆಳೆಯಲು ಬರುತ್ತಾರೆ. ಅವರ ಸಮಸ್ಯೆಗಳು ಕಾನೂನುಬದ್ಧವೇ ಅಥವಾ ಅಲ್ಲವೇ ಎಂಬುದನ್ನು ಪರಿಶೀಲಿಸಿ, ಸಂಬಂಧಿತ ಅಧಿಕಾರಿಗಳ ಮೂಲಕ ಪರಿಹಾರ ಕಂಡುಕೊಳ್ಳಲು ‘ಪ್ರಜಾಸೇವೆ’ ಇಲಾಖೆ ನೆರವಾಗಲಿದೆ ಎಂದು ಸಿಎಂ ತಿಳಿಸಿದರು.
ಇದೇ ವೇಳೆ ಅಧಿಕಾರಿಗಳಿಗೆ 15 ದಿನಗಳೊಳಗೆ ತಮ್ಮ ಇಲಾಖೆಗಳ ಕಾರ್ಯಯೋಜನೆ ಸಿದ್ಧಪಡಿಸುವಂತೆ ಸೂಚಿಸಿರುವ ಸಿಎಂ, ಯಾವುದೇ ರಾಜಕೀಯ ಅಥವಾ ಇತರೆ ಒತ್ತಡಗಳಿಗೆ ಮಣಿಯದೆ ಕಾನೂನು ಚೌಕಟ್ಟಿನೊಳಗೆ ಕೆಲಸ ಮಾಡುವಂತೆ ನಿರ್ದೇಶನ ನೀಡಿದ್ದಾರೆ. ಸರ್ಕಾರ ಪಾರದರ್ಶಕ, ನ್ಯಾಯಸಮ್ಮತ ಹಾಗೂ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲು ಬದ್ಧವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸಿ, ಅದಕ್ಕೆ ಸ್ಪಂದಿಸಿ ನ್ಯಾಯ ದೊರಕಿಸಲು ಈ ಪ್ರಜಾಸೇವೆ ಇಲಾಖೆಯನ್ನು ರಚಿಸಲು ನಿರ್ಧರಿಸಿದ್ದು, ಈ ಹೊಸ ಇಲಾಖೆಯಲ್ಲಿ ಪ್ರತ್ಯೇಕವಾಗಿ ಸಚಿವರು ಹಾಗೂ IAS ಅಧಿಕಾರಿಗಳು ಇರಲಿದ್ದಾರೆ. ಹೋಗಿ ಶಾಸಕರ ಜತೆ ಸಭೆ ನಡೆಸಿ ಜನರ ಅಹವಾಲುಗಳನ್ನು ಆಲಿಸಿ ನ್ಯಾಯ ದೊರಕಿಸುವ ಕೆಲಸ ಮಾಡಲಿದ್ದಾರೆ. ವಾರಕ್ಕೊಮ್ಮೆ ಕಡ್ಡಾಯವಾಗಿ ಶಾಸಕರ ಜತೆಗೂಡಿ ಜನಸ್ಪಂದನ ಸಭೆ ನಡೆಸಿ ಅಲ್ಲಿನ ಅಭಿಪ್ರಾಯಗಳನ್ನು ನಮಗೆ ತಲಪಿಸುತ್ತಾರೆ ಎಂದರು.
ಜನರ ಸಮಸ್ಯೆಗಳಿಗೆ ವೇಗವಾಗಿ ಸ್ಪಂದಿಸಿ, ಆಡಳಿತವನ್ನು ಇನ್ನಷ್ಟು ಜನಸ್ನೇಹಿಯಾಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಪ್ರಜಾಸೇವೆ’ ಇಲಾಖೆಯನ್ನು ಆರಂಭಿಸುತ್ತಿದೆ. ಈ ಹೊಸ ವ್ಯವಸ್ಥೆ ಜಾರಿಗೆ ಬಂದರೆ ಸಾರ್ವಜನಿಕರ ದೂರುಗಳು ಮತ್ತು ಬೇಡಿಕೆಗಳಿಗೆ ಒಂದೇ ವೇದಿಕೆಯಲ್ಲಿ ಪರಿಹಾರ ದೊರೆಯುವ ನಿರೀಕ್ಷೆ ಮೂಡಿದೆ.
ಕರಾವಳಿಯಲ್ಲೇ ಕ್ಯಾಬಿನೆಟ್; ಪ್ರವಾಸೋದ್ಯಮ ಮತ್ತು ಆರ್ಥಿಕ ವಿಕಾಸಕ್ಕೆ ಸರ್ಕಾರದ ಹೆಜ್ಜೆ
ವಿಧಾನ ಸೌಧದದಲ್ಲಿ ಕರಾವಳಿಯ ಅಭಿವೃದ್ಧಿ ಕುರಿತು ಹಿರಿಯ ಅಧಿಕಾರಿಗಳು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರೊಂದಿಗೆ ಸಿಎಂ ಸಭೆ ನಡೆಸಿದರು. ಕರ್ನಾಟಕದ ಕರಾವಳಿ ತೀರವು ದೇಶದಲ್ಲೇ ಅತ್ಯಂತ ಸುಂದರ ಹಾಗೂ ಸುದೀರ್ಘವಾದ ಇತಿಹಾಸ ಹೊಂದಿದೆ. ಇಲ್ಲಿನ ಪರಿಸರಕ್ಕೆ ಯಾವುದೇ ಧಕ್ಕೆ ಬಾರದಂತೆ ಈ ಭಾಗವನ್ನು ಪ್ರವಾಸೋದ್ಯಮದ ಹಬ್ ಆಗಿ ಪರಿವರ್ತಿಸಲು ನಾವು ನಿರ್ಧರಿಸಿದ್ದೇವೆ.
ಸಭೆಯ ಪ್ರಮುಖ ನಿರ್ಧಾರಗಳು ಮತ್ತು ಸೂಚನೆಗಳು: – ಕರಾವಳಿಯಲ್ಲೇ ಸಂಪುಟ ಸಭೆ: ಕರಾವಳಿಯ ಸ್ಥಳೀಯ ಸಮಸ್ಯೆಗಳನ್ನು ಅರಿತು ತಕ್ಷಣದ ನಿರ್ಧಾರ ಕೈಗೊಳ್ಳಲು ಶೀಘ್ರದಲ್ಲೇ ಕರಾವಳಿ ಭಾಗದಲ್ಲೇ ಕ್ಯಾಬಿನೆಟ್ ಸಭೆ ನಡೆಸಲಾಗುವುದು. – ತಾಂತ್ರಿಕ ತಕರಾರುಗಳಿಗೆ ಬ್ರೇಕ್: ಸಿಆರ್ಝಡ್ (CRZ) ಮತ್ತು ಅರಣ್ಯ ಇಲಾಖೆಯಿಂದ ಯೋಜನೆಗಳಿಗೆ ಎದುರಾಗುತ್ತಿರುವ ತಾಂತ್ರಿಕ ತೊಂದರೆಗಳಿಗೆ 15-20 ದಿನಗಳ ಒಳಗಾಗಿ ಪರಿಹಾರದ ವರದಿ ನೀಡಲು ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ. – ಏಕ ಗವಾಕ್ಷಿ (ಸಿಂಗಲ್ ವಿಂಡೋ) ವ್ಯವಸ್ಥೆ: ಹೂಡಿಕೆದಾರರಿಗೆ ಇಲಾಖೆಗಳಿಂದ ಆಗುವ ಕಿರಿಕಿರಿಗಳನ್ನು ತಪ್ಪಿಸಿ, ಸುಗಮ ವ್ಯವಹಾರಕ್ಕಾಗಿ ಏಕ ಗವಾಕ್ಷಿ ಪದ್ಧತಿ ಜಾರಿಗೆ ಒಲವು ತೋರಲಾಗಿದೆ. ಉದ್ಯಮಿಗಳ ಬೇಡಿಕೆಯಂತೆ ಹೆಲಿ ಟೂರಿಸಂಗೆ ಉತ್ತೇಜನ. – ಉದ್ಯೋಗ ಸೃಷ್ಟಿಗೆ ಆದ್ಯತೆ: ಕರ್ನಾಟಕ ಪ್ರವಾಸೋದ್ಯಮ ನೀತಿಯಡಿ ಈಗಾಗಲೇ ₹718.63 ಕೋಟಿ ಅಂದಾಜು ಹೂಡಿಕೆಯ 45 ಬೃಹತ್ ಯೋಜನೆಗಳನ್ನು ಅನುಮೋದಿಸಲಾಗಿದ್ದು, ಇದರಿಂದ 4,500 ಯುವಕರಿಗೆ ಉದ್ಯೋಗ ಸಿಗಲಿದೆ. ಈ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಲಾಗುವುದು. – ಜಾಗತಿಕವಾಗಿ ನಮ್ಮ ಕರಾವಳಿ : ಕರಾವಳಿಯ ಸಂಸ್ಕೃತಿ, ಆಚರಣೆ, ಹೆಮ್ಮೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಾರ ಮತ್ತು ಪ್ರಚಾರ ಮಾಡಲಾಗುವುದು. – ಕಲೆ ಮತ್ತು ಸಿನಿಮಾಗೆ ಪ್ರೋತ್ಸಾಹ: ಖ್ಯಾತ ಚಲನಚಿತ್ರ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಅವರ ಸಮ್ಮುಖದಲ್ಲಿ ಕರಾವಳಿಯ ಸಿನಿಮಾ, ಜನಪದ ಕಲೆ, ಸಂಗೀತಕ್ಕೆ ಪ್ರಾಶಸ್ತ್ಯ ನೀಡುವ ಬಗ್ಗೆ ಚರ್ಚಿಸಲಾಯಿತು.

ಸರ್ಕಾರದ ಈ ಮಹತ್ವಾಕಾಂಕ್ಷಿ ಯೋಜನೆಗಳನ್ನು ಸಾಧಿಸಲು ಮತ್ತು ಬಂಡವಾಳಗಳನ್ನು ಆಕರ್ಷಿಸಲು ಹೂಡಿಕೆದಾರರಿಗೆ ಸಹಾಯಧನ, ಬಡ್ಡಿ ಸಹಾಯಧನ ಮತ್ತು ರಿಯಾಯ್ತಿಗಳ ಮೂಲಕ ಪ್ರೋತ್ಸಾಹಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.


