ಅಪಘಾತದಲ್ಲಿ ಮೃತರಾದ ಭುವನಾ ಕುಟುಂಬಕ್ಕೆ 1 ಕೋಟಿ ವಿಮೆ, ಒಬ್ಬರಿಗೆ ಸರ್ಕಾರಿ ಕೆಲಸ: DCM ಭರವಸೆ.
news.ashwasurya.in
SIR ಕರ್ತವ್ಯಕ್ಕಾಗಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಅಪಘಾತವಾಗಿ ಸಾವನ್ನಪ್ಪಿದ್ದ ಗ್ರಾಮ ಲೆಕ್ಕಾಧಿಕಾರಿ ಭುವನಾ ಅವರ ಕುಟುಂಬಕ್ಕೆ 1 ಕೋಟಿ ವಿಮೆ ಹಣ 15 ದಿನಗಳಲ್ಲಿ ಬರುತ್ತದೆ. ಅಲ್ಲದೇ ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ಉದ್ಯೋಗ ಕೊಡುತ್ತೇವೆ. ಚುನಾವಣಾ ಆಯೋಗದಿಂದ 30 ಲಕ್ಷ ರೂ. ಮಂಜೂರು ಮಾಡಿಸುತ್ತೇವೆ ಎಂದು ಕಂದಾಯ ಸಚಿವರೂ ಆದ ಡಿಸಿಎಂ ಪರಮೇಶ್ವರ್ ಭರವಸೆ ನೀಡಿದ್ದಾರೆ.

ಅಶ್ವಸೂರ್ಯ/ತುಮಕೂರು : SIR ಕರ್ತವ್ಯಕ್ಕಾಗಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಅಪಘಾತವಾಗಿ ಸಾವನ್ನಪ್ಪಿದ್ದ ಗ್ರಾಮ ಲೆಕ್ಕಾಧಿಕಾರಿ ಭುವನಾ ಕುಟುಂಬಕ್ಕೆ 1 ಕೋಟಿ ವಿಮೆ ಹಣ 15 ದಿನಗಳಲ್ಲಿ ಬರುತ್ತದೆ. ಅಲ್ಲದೇ ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರ ಉದ್ಯೋಗ ಕೊಡುತ್ತೇವೆ. ಚುನಾವಣಾ ಆಯೋಗದಿಂದ 30 ಲಕ್ಷ ರೂ. ಮಂಜೂರು ಮಾಡಿಸುತ್ತೇವೆ ಎಂದು ಕಂದಾಯ ಸಚಿವರೂ ಆದ ಡಿಸಿಎಂ ಪರಮೇಶ್ವರ್ ಭರವಸೆ ನೀಡಿದ್ದಾರೆ.

ಭುವನಾ ಸಾವು ಖಂಡಿಸಿ ಕಂದಾಯ ನೌಕರರ ಸಂಘದಿಂದ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಪರಮೇಶ್ವರ್, ಶೀಘ್ರದಲ್ಲೇ ಪರಿಹಾರ ಕೊಡಿಸುವ ಹಾಗೂ ನೌಕರರ ಬೇಡಿಕೆ ಈಡೇರಿಸುವ ಭರವಸೆ ನೀಡಿದರು. ಬಳಿಕ ನೌಕರರ ಸಂಘವು ಪ್ರತಿಭಟನೆ ಹಿಂಪಡೆದುಕೊಂಡಿದೆ. ಈ ವೇಳೆ ಮಾತನಾಡಿದ ಪರಮೇಶ್ವರ್, ನಾನು ತಕ್ಷಣ ಸ್ಪಂದಿಸಲು ಆಗದಿದ್ದಕ್ಕೆ ಕ್ಷಮೆ ಕೋರುತ್ತೇನೆ. ನನ್ನ ಆರೋಗ್ಯದಲ್ಲಿ ವ್ಯತ್ಯಾಸ ಆಗಿತ್ತು, ಹಾಗಾಗಿ ಬರಲು ಆಗಿರಲಿಲ್ಲ. ನಿಮ್ಮನ್ನು ನಿರ್ಲಕ್ಷ್ಯ ಮಾಡಲು ನಾನು ಬಿಡಲ್ಲ ಎಂದು ಹೇಳಿದ್ದಾರೆ.
ಜೊತೆಗೆ, ಚುನಾವಣಾ ಆಯೋಗದಿಂದಲೂ ವಿಶೇಷ ಪರಿಹಾರವಾಗಿ 30 ಲಕ್ಷ ರೂ. ಮಂಜೂರು ಮಾಡಿಸಲು ಪ್ರಯತ್ನಿಸಲಾಗುವುದು ಎಂದು ಅವರು ಹೇಳಿದರು. “ಇದು ಕರ್ತವ್ಯದಲ್ಲಿದ್ದಾಗ ಸಂಭವಿಸಿದ ದುರ್ಘಟನೆ. ಹೀಗಾಗಿ ಸರ್ಕಾರದ ಮಟ್ಟದಲ್ಲಿ ಸಿಗಬೇಕಾದ ಎಲ್ಲಾ ನೆರವನ್ನೂ ಒದಗಿಸುತ್ತೇವೆ. ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡುವ ಬಗ್ಗೆ ಸಹ ಸಕಾರಾತ್ಮಕ ನಿರ್ಧಾರ ಕೈಗೊಳ್ಳಲಾಗುತ್ತದೆ” ಎಂದು ಪರಮೇಶ್ವರ್ ತಿಳಿಸಿದ್ದಾರೆ.

ಏನಿದು ಘಟನೆ?
ತುಮಕೂರು ತಾಲೂಕಿನ ಹುಲ್ಲೇನಹಳ್ಳಿಯ ಗ್ರಾಮ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಟಿ. ಬೇಗೂರು ನಿವಾಸಿ ಭುವನಾ, ಶನಿವಾರ ಬೆಳಿಗ್ಗೆ ಎಸ್ಐಆರ್ ಪ್ರಕ್ರಿಯೆಯ ಸೂಪರ್ವೈಸರ್ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರುಹೀಗಾಗಿ ತುಮಕೂರು ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ತಮ್ಮ ದ್ವಿಚಕ್ರ ವಾಹನವನ್ನು ತೆಗೆದುಕೊಂಡು ಗೂಳೂರಿನ ನಾಡಕಚೇರಿಗೆ ಹೊರಟಿದ್ದರು.

ಬೆಳಗ್ಗೆ ಕುಣಿಗಲ್ ರಸ್ತೆಯ ಗೂಳೂರು ಬಳಿ ತೆರಳುತ್ತಿದ್ದಾಗ ಎದುರಿನಿಂದ ಬಂದ ಲಾರಿಯೊಂದು ಅವರ ಬೈಕ್ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಭುವನಾ ಅವರು ಹೆಲ್ಮೆಟ್ ಧರಿಸಿದ್ದರೂ, ಡಿಕ್ಕಿಯ ರಭಸಕ್ಕೆ ಅವರ ತಲೆಗೆ ಗಂಭೀರ ಪೆಟ್ಟಾಗಿತ್ತು. ತಕ್ಷಣವೇ ಅವರನ್ನು ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯ ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಂಜೆ ಅವರು ಮೃತಪಟ್ಟಿದ್ದಾರೆ.


