ಬೆಂಗಳೂರು : ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್.! ಹೈಕೋರ್ಟ್ನಿಂದ ಜಾಮೀನು ಮಂಜೂರು.!
news.ashwasurya.in
ಅಶ್ವಸೂರ್ಯ/ಬೆಂಗಳೂರು: ಕಾಂಗ್ರೆಸ್ನ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ಪ್ರಕರಣದಲ್ಲಿ ವಿಧಿಸಲಾಗಿದ್ದ ಶಿಕ್ಷೆಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿರುವ ನ್ಯಾಯಾಲಯ, ಅವರಿಗೆ ಜಾಮೀನು ಮಂಜೂರು ಮಾಡಿದೆ.ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ನ್ಯಾಯಾಲಯವು 5 ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್ ಹಾಗೂ ಅದೇ ಮೊತ್ತದ ಒಬ್ಬ ಶ್ಯೂರಿಟಿಯನ್ನು ಸಲ್ಲಿಸುವಂತೆ ಷರತ್ತು ವಿಧಿಸಿದೆ. ಈ ಷರತ್ತುಗಳನ್ನು ಪೂರೈಸಿದ ಬಳಿಕ ಜಾಮೀನಿನ ಸೌಲಭ್ಯ ದೊರೆಯಲಿದೆ ಎಂದು ನ್ಯಾಯಾಲಯ ಆದೇಶಿಸಿದೆ. ಈ ಆದೇಶದೊಂದಿಗೆ ವಿನಯ್ ಕುಲಕರ್ಣಿಗೆ ತಾತ್ಕಾಲಿಕ ನೆಮ್ಮದಿ ಸಿಕ್ಕಿದ್ದು, ವಿನಯ್ ಕುಲಕರ್ಣಿ ದೋಷಿ ಎಂದಿದ್ದ ತೀರ್ಪಿಗೂ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಹೌದು. ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ.
ಜೀವಾವಧಿ ಶಿಕ್ಷೆ ವಿಧಿಸಿದ್ದ ವಿಶೇಷ ನ್ಯಾಯಾಲಯ
2016ರಲ್ಲಿ ನಡೆದ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ, ಜನಪ್ರತಿನಿಧಿಗಳ ವಿಶೇಷ ಸೆಷನ್ಸ್ ನ್ಯಾಯಾಲಯವು 2026ರ ಏಪ್ರಿಲ್ 15ರಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 17 ಮಂದಿಯನ್ನು ಅಪರಾಧಿಗಳೆಂದು ಘೋಷಿಸಿತ್ತು. ಬಳಿಕ ಏಪ್ರಿಲ್ 17ರಂದು ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಕರ್ನಾಟಕ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಏನಿದು ಯೋಗೀಶ್ ಗೌಡ ಕೊಲೆ ಪ್ರಕರಣ? :
2016ರ ಜೂನ್ನಲ್ಲಿ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಈ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 21 ಮಂದಿಯ ವಿರುದ್ಧ ಆರೋಪಗಳು ಕೇಳಿಬಂದಿದ್ದವು. ನಂತರ ಪ್ರಕರಣವನ್ನು ಅಂದಿನ ಬಿಜೆಪಿ ಸರ್ಕಾರ ಸಿಬಿಐಗೆ ವಹಿಸಿತ್ತು. ಸಿಬಿಐ ಸುದೀರ್ಘ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿತ್ತು. ವಿಚಾರಣೆ ಪೂರ್ಣಗೊಂಡ ಬಳಿಕ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು.


