ಶಿವಮೊಗ್ಗ: ಮನೆ ನಿರ್ಮಾಣ ಹಾಗೂ ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ವಂಚನೆ? ಆಶೀರಾಜ್ ಬಿಲ್ಡರ್ಸ್ ಕಚೇರಿ ಮೇಲೆ ತುಂಗಾನಗರ ಪೊಲೀಸರ ದಾಳಿ.
news.ashwasurya.in
ಅಶ್ವಸೂರ್ಯ/ಶಿವಮೊಗ್ಗ, ಆ.6: ನಗರದ ಗೋಪಾಲ ಗೌಡ ಬಡಾವಣೆಯಲ್ಲಿರುವ ಆಶೀರಾಜ್ ಬಿಲ್ಡರ್ಸ್ ಮತ್ತು ಡೆವಲಪರ್ಸ್ ವಿರುದ್ಧ ಮನೆಗಳನ್ನು ಕಡಿಮೆ ವೆಚ್ಚದಲ್ಲಿ ನಿರ್ಮಿಸಿ ನೀಡುವುದಾಗಿ ಹಾಗೂ ಮನೆ ನಿರ್ಮಾಣಕ್ಕೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಒದಗಿಸುವುದಾಗಿ ಭರವಸೆ ನೀಡಿ ಸಾರ್ವಜನಿಕರಿಂದ ಹಣ ಪಡೆದು ವಂಚಿಸಿರುವ ಆರೋಪದಡಿ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ತುಂಗಾನಗರ ಪೊಲೀಸರು ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಬುಧವಾರ ಸಂಸ್ಥೆಯ ಕಚೇರಿ ಮೇಲೆ ದಾಳಿ ನಡೆಸಿದರು. ದಾಳಿಯ ವೇಳೆ ಕಚೇರಿಯಲ್ಲಿದ್ದ ದಾಖಲೆಗಳು, ಒಪ್ಪಂದ ಪತ್ರಗಳು, ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ಕೆಲವು ದಾಖಲೆಗಳು, ಕಂಪ್ಯೂಟರ್ ಹಾಗೂ ಇತರೆ ಪ್ರಮುಖ ಮಾಹಿತಿಗಳನ್ನು ಪರಿಶೀಲಿಸಿ ಅಗತ್ಯ ದಾಖಲೆಗಳನ್ನು ವಶಪಡಿಸಿಕೊಂಡಿರುವ ಸಾಧ್ಯತೆ ಇದೆ. ಪೊಲೀಸ್ ಇಲಾಖೆಯಿಂದ ಈ ಕುರಿತು ಅಧಿಕೃತ ಮಾಹಿತಿ ನಿರೀಕ್ಷೆಯಲ್ಲಿ ಪತ್ರಿಕೆ ಇದೆ.

ಆರೋಪದ ಪ್ರಕಾರ, ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಮನೆ ನಿರ್ಮಿಸಿಕೊಡುವುದಾಗಿ ಹಾಗೂ ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳ ಮೂಲಕ ಸುಲಭವಾಗಿ ಸಾಲ ಮಂಜೂರು ಮಾಡಿಸಿಕೊಡುವುದಾಗಿ ನಂಬಿಕೆ ಮೂಡಿಸಿ ಹಲವರಿಂದ ಮುಂಗಡ ಹಣ ಹಾಗೂ ವಿವಿಧ ಶುಲ್ಕಗಳ ಹೆಸರಿನಲ್ಲಿ ಹಣ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಭರವಸೆ ನೀಡಿದಂತೆ ಮನೆ ನಿರ್ಮಾಣ ಅಥವಾ ಸಾಲದ ವ್ಯವಸ್ಥೆ ಮಾಡಿಕೊಡದೇ ವಂಚಿಸಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ.
ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ತುಂಗಾನಗರ ಪೊಲೀಸರು ತನಿಖೆ ಆರಂಭಿಸಿದ್ದು, ನ್ಯಾಯಾಲಯದ ಅನುಮತಿಯೊಂದಿಗೆ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಂದಿ ವಂಚನೆಗೆ ಒಳಗಾಗಿರುವ ಸಾಧ್ಯತೆಯನ್ನೂ ಪೊಲೀಸರು ಪರಿಶೀಲಿಸುತ್ತಿದ್ದು, ದಾಖಲೆಗಳ ಪರಿಶೀಲನೆಯ ನಂತರ ಪ್ರಕರಣದ ವ್ಯಾಪ್ತಿ ಮತ್ತಷ್ಟು ಸ್ಪಷ್ಟವಾಗುವ ನಿರೀಕ್ಷೆಯಿದೆ.
ಪೊಲೀಸರ ತನಿಖೆ ಮುಂದುವರಿದಿದ್ದು, ವಂಚನೆ ಪ್ರಕರಣದಲ್ಲಿ ಇನ್ನಷ್ಟು ಮಾಹಿತಿಗಳು ಹಾಗೂ ಹೊಸ ಬೆಳವಣಿಗೆಗಳು ಹೊರಬೀಳುವ ಸಾಧ್ಯತೆ ಇದೆ. ತನಿಖೆ ಪೂರ್ಣಗೊಂಡ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ..


